72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪೂರ್ವಭಾವಿ ಸಭೆ
ಬೆಂಗಳೂರು: ರಾಜ್ಯದಲ್ಲಿ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ. ಸಹಕಾರ ತತ್ವದಡಿ ಬರುವ ಎಲ್ಲಾ ಸಂಘ ಸಂಸ್ಥೆಗಳನ್ನು ಸಬಲೀಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತ ಪ್ರಶಸ್ತಿಯನ್ನು ರಾಜ್ಯೋತ್ಸವ ಪ್ರಶಸ್ತಿ ಮಾದರಿಯಲ್ಲಿ ನೀಡಿದರೆ ಒಳ್ಳೆಯದು ಎನ್ನುವುದು ನನ್ನ ಅಭಿಪ್ರಾಯ. ಮೊದಲೆಲ್ಲಾ ನೂರಾರು ಪ್ರಶಸ್ತಿ ಕೊಡಲಾಗುತ್ತಿತ್ತು. ಈಗ ಎಷ್ಟನೇ ವರ್ಷದ ಆಚರಣೆಯೋ ಅಷ್ಟೇ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಅಥವಾ ಜಿಲ್ಲೆಗೆ ಒಂದರಂತೆ ಪ್ರಶಸ್ತಿ ನೀಡಿದರೆ ಸೂಕ್ತ. ಬೆಂಗಳೂರಿಗೆ ಅಗತ್ಯವಿದ್ದರೆ ಎರಡರಿಂದ ಐದು ಪ್ರಶಸ್ತಿಗಳನ್ನು ನೀಡಬಹುದು ಎಂದರು.
ಸಹಕಾರಿ ಕ್ಷೇತ್ರವನ್ನು ಮೊದಲಿನಿಂದಲೂ ಬೆಂಬಲಿಸಿಕೊಂಡು ಬಂದಿದ್ದೇನೆ. ಸಹಕಾರಿ ಕ್ಷೇತ್ರದಲ್ಲಿ ಒಕ್ಕೂಟಗಳನ್ನು ಇನ್ನಷ್ಟು ಬಲಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಂಘಗಳು ರೈತರ ಅಧೀನದಲ್ಲಿಯೇ ನಡೆಯಬೇಕು ಎಂದು ಒತ್ತಾಯಿಸಿದ್ದೆ. ಈಗಲೂ ಅದರಂತೆ ನಡೆಯುತ್ತಿದೆ. ಮೊದಲಿನಿಂದಲೂ ಈ ಕ್ಷೇತ್ರವನ್ನು ಬೆಂಬಲಿಸಿಕೊಂಡೇ ಬಂದಿದ್ದೇನೆ ಎಂದರು.
ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಬಹುತೇಕ ರೈತರ ಸಾಲಮನ್ನಾ ಮಾಡಲಾಗಿದೆ. ರಾಜ್ಯದ ನೇಕಾರ, ಬಡಗಿ, ಮೀನುಗಾರರ ಸೊಸೈಟಿಗಳಂತಹ ವೃತ್ತಿಮೂಲ ಸಂಘಗಳನ್ನು ಹಂತ ಹಂತವಾಗಿ ಸಬಲಗೊಳಿಸಲಾಗುವುದು. ಸಹಕಾರ ಸಪ್ತಾಹದ ಘೋಷವಾಕ್ಯಗಳನ್ನು ಕೇಂದ್ರ ಸರ್ಕಾರದ ಬದಲಿಗೆ ಆಯಾ ರಾಜ್ಯಗಳೇ ಘೋಷಿಸಬೇಕು ಎನ್ನುವುದು ನನ್ನ ಅಭಿಪ್ರಾಯ ಎಂದರು.

