ಸೋಮವಾರ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಜನ ತಮ್ಮ ಕಷ್ಟಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಿರಿಸಿದರು. ಮೊದಲ ದೀರ್ಘ ಅವಧಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ವೃದ್ಧರು, ಮಹಿಳೆಯರು ಸೇರಿದಂತೆ ಭಿನ್ನ ಹಿನ್ನೆಲೆಯ ನೂರಾರು ಜನರು ಭರವಸೆ, ಪರಿಹಾರದ ವಿಶ್ವಾಸದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದರು.

ಬಸವರಾಜು ಅವರು, ಕಿಡ್ನಿ ಕಾಯಿಲೆಯಿಂದ ಬಳಲುತ್ತಿರುವ ತಮ್ಮ ಸಹೋದರ ವೆಂಕಟರಾಜ್ ಎಂಬವವರ ನೆರವಿಗೆ ಬರುವಂತೆ ಮನವಿ ಮಾಡಿದರು. ಸಿಎಂ ಅವರು, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸ್ಥಳದಲ್ಲಿಯೇ ಒಂದು ಲಕ್ಷ ರೂ. ನೆರವು ಮಂಜೂರು ಮಾಡಿದರು.

ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಮಹದೇವಮ್ಮ ಅವರಿಗೆ ಮಗ ಆಸ್ತಿಯಲ್ಲಿ ಪಾಲು ಕೊಡದೇ ಮೋಸ ಮಾಡಿದ್ದಾನೆ, ವಿಭಾಗ ಪತ್ರವನ್ನು ಕೊಡಿಸಿ ರಕ್ಷಣೆ ನೀಡುವಂತೆ ಮನವಿ ಮಾಡಿದರು. ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಕರೆ ಮಾಡಿದ ಸಿಎಂ ಮಹದೇವಪ್ಪ ಅವರಿಗೆ ನ್ಯಾಯ ಕೊಡಿಸುವಂತೆ ಸೂಚಿಸಿದರು.

ರಾಣೆಬೆನ್ನೂರಿನ ಜೀವ ಬೆಳಕು ಅಂಧ ಮಕ್ಕಳ ಶಾಲೆಗೆ ಸಿ.ಎ. ನಿವೇಶನ ಮಂಜೂರಾಗಿದ್ದು, ಇದಕ್ಕಾಗಿ 9 ಲಕ್ಷ ರೂ. ಪಾವತಿಸುವಂತೆ ಸೂಚಿಸಿದ್ದಾರೆ. ಇದನ್ನು ಪಾವತಿಸಲು ಶಕ್ತರಿಲ್ಲದ ಕಾರಣ ಹಣ ಪಾವತಿಯಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದರು. ಆನ್ ಲೈನ್ ಮೂಲಕ ಹಾವೇರಿ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದ ಸಿಎಂ, ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರು ಸೂಚಿಸಿದರು.

ರಾಮನಗರ ಜಿಲ್ಲೆಯ ರಾಜಮ್ಮ ಎಂಬ ವೃದ್ಧೆ ತಮ್ಮ ಜಮೀನನ್ನು ಮೈದುನ ಒತ್ತುವರಿ ಮಾಡಿಕೊಂಡಿದ್ದು, ಬಾವಿಯನ್ನೂ ಮುಚ್ಚಿರುತ್ತಾರೆ. ತಮಗೆ ಗಂಡು ಮಕ್ಕಳಿಲ್ಲ; ಹೆಣ್ಣು ಮಕ್ಕಳು ಮದುವೆಯಾಗಿ, ಗಂಡನ ಮನೆಯಲ್ಲಿದ್ದಾರೆ. ಒಬ್ಬರೇ ಇರುವ ತನಗೆ ಜಮೀನು ಬಿಡಿಸಿಕೊಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದರು. ರಾಮನಗರ ಜಿಲ್ಲಾಧಿಕಾರಿಗಳಿಗೆ ಆನ್ ಲೈನ್ ಮೂಲಕ ಸಂಪರ್ಕಿಸಿದ ಸಿಎಂ ಸ್ಥಳ ಪರಿಶೀಲಿಸಿ, ರಾಜಮ್ಮ ಅವರ ಜಮೀನು ಬಿಡಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಮಂಡ್ಯ ಜಿಲ್ಲೆಯ 96 ವರ್ಷದ ಪರಂಧಾಮಯ್ಯ ಅವರು ನಾಗಮಂಗಲದಿಂದ ತಾಳವಾಡಿಯ ಮಾರ್ಗ ಮಧ್ಯೆಯ ಜಮೀನು ಹೊಂದಿದ್ದು, ವ್ಯವಸಾಯ ಮಾಡುವ ಜಮೀನನ್ನು ಬೈಪಾಸಿಗೆ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ದೂರು ನೀಡಿದರು. ಕೂಡಲೇ ಮಂಡ್ಯ ಜಿಲ್ಲಾಧಿಕಾರಿಗಳಿಗೆ ಆನ್ ಲೈನ್ ಮೂಲಕ ಮಾತನಾಡಿದ ಮುಖ್ಯಮಂತ್ರಿಗಳು ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದರು. 96 ವರ್ಷದ ಪರಂದಾಮಯ್ಯ ಜೀವನೋತ್ಸಾಹಕ್ಕೆ ಮುಖ್ಯಮಂತ್ರಿಗಳು ಮೆಚ್ಚುಗೆ ಸೂಚಿಸಿ ಇನ್ನಷ್ಟು ಕಾಲ ಹೀಗೇ ಆರೋಗ್ಯವಾಗಿ ಗಟ್ಟಿಯಾಗಿರಿ ಎಂದು ಶುಭ ಕೋರಿದರು.

ಬೆಳಗಾವಿಯ ಉಜ್ಮಾ ಬಾನು ಎಂಬವರು ತಮ್ಮ ತಂದೆಯವರು ಕೆ.ಯು.ಡಬ್ಲ್ಯು.ಎಸ್.ಎಸ್.ಬಿ. ಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮೃತಪಟ್ಟಿದ್ದಾರೆ. ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವ ಬಗ್ಗೆ ಮೊದಲಿಗೆ ಹುದ್ದೆಗಳು ಖಾಲಿ ಇಲ್ಲವೆಂದು ತಿಳಿಸಲಾಗಿತ್ತು. ನಂತರ ಅಪ್ರಾಪ್ತ ವಯಸ್ಕರಾದ್ದರಿಂದ ಉದ್ಯೋಗ ನೀಡಲು ಅವಕಾಶವಿಲ್ಲ ಎಂದು ತಿಳಿಸಲಾಗಿತ್ತು. ನಿಯಮಾನುಸಾರ ಅವರು ವಯಸ್ಕರಾದ ನಂತರ ಎರಡು ವರ್ಷಗಳೊಳಗೆ ಅರ್ಜಿಸಲ್ಲಿಸಲು ಅವಕಾಶವಿರುವುದರಿಂದ ಉದ್ಯೋಗ ದೊರಕಿಸುವಂತೆ ಕೋರಿದರು. ಈ ಕುರಿತು ಕ್ರಮ ಕೈಗೊಳ್ಳುವಂತೆ ಕೆ.ಯು.ಡಬ್ಲ್ಯು.ಎಸ್.ಎಸ್.ಬಿ. ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಚನ್ನಪಟ್ಟಣ ತಾಲ್ಲೂಕು ಮಳೂರು ಗ್ರಾಮದಲ್ಲಿ ಜಮೀನಿಗೆ ಗಾಡಿ ಹೊಡೆಯಲು ರಸ್ತೆ ನಿರ್ಮಾಣ ಕಾರ್ಯವನ್ನು ಗ್ರಾಮಪಂಚಾಯಿತಿಯವರು ಅರ್ಧಕ್ಕೆ ಸ್ಥಗಿತಗೊಳಿಸಿರುವುದರಿಂದ ತೊಂದರೆಯಾಗಿದೆ ಎಂದು ಗ್ರಾಮಸ್ಥರು ಸಲ್ಲಿಸಿದ ಮನವಿಯನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿದರು. ಸಿಎಂ ಕೂಡಲೇ ಆನ್ ಲೈನ್ ಮೂಲಕ ಸಂಬಂಧಪಟ್ಟವರನ್ನು ಸಂಪರ್ಕಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

