ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲಬುರ್ಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ
ಬೆಂಗಳೂರು: ಕಲಬುರ್ಗಿ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಾಗೂ ಕೃಷ್ಣಾ ನದಿಗೆ ಮಹಾರಾಷ್ಟ್ರದ ಉಜನಿ ಹಾಗೂ ನೀರ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಭೀಮಾ ನದಿ ತೀರದಲ್ಲಿ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಿ, ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲಬುರ್ಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ಎದುರಿಸಲು ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು ಹೀಗಿವೆ;
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸಿಇಒ ಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು.
ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಬೇಕು.
ಜನ ಮತ್ತು ಜಾನವಾರುಗಳ ಪ್ರಾಣ ರಕ್ಷಣೆಗೆ ಪ್ರಥಮ ಆದ್ಯತೆ ನೀಡಿ, ಅಗತ್ಯವಿರುವ ಎಲ್ಲಾ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.
ಸಂತ್ರಸ್ಥರಿಗೆ ಕಾಳಜಿ ಕೇಂದ್ರಗಳು, ಜಾನುವಾರುಗಳಿಗೆ ಅಗತ್ಯ ಮೇವು ಸೇರಿದಂತೆ ತಾತ್ಕಾಲಿಕ ಸೂರು ಕಲ್ಪಿಸಬೇಕು.

